ದಾವಣಗೆರೆ :ಜಿಲ್ಲಾ ೧೪ ನೇ ಕನ್ನಡ ಸಾಹಿತ್ಯ ಸಮ್ಮೇಳನವು ಜಗಳೂರು ಪಟ್ಟಣದಲ್ಲಿ ದಿನಾಂಕ 11 ಮತ್ತು 12 ಜನವರಿ 2025 ರಂದು ನಡೆಯಲಿದೆ ಹಾಗೂ ಸಮ್ಮೇಳನದ ಸರ್ವಾಧ್ಯಕ್ಷರಾಗಿ ವಿಶ್ರಾಂತ ಕನ್ನಡ ಅಧ್ಯಾಪಕರು, ಲೇಖಕರು, ವಾಗ್ಮಿಗಳು ಹಾಗೂ ಸಾಂಸ್ಕೃತಿಕ ಚಿಂತಕ ಪ್ರೊ.ಎ.ಬಿ.ರಾಮಚಂದ್ರಪ್ಪ ಆಯ್ಕೆಯಾಗಿದ್ದಾರೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ.ವಾಮದೇವಪ್ಪ ತಿಳಿಸಿದರು.
ವೈಚಾರಿಕ ಹಾಗೂ ಸಾಂಸ್ಕೃತಿಕ ಚಿಂತಕ, ಜನಪರ ಹೋರಾಟಗಾರ ಪ್ರೊ.ಎ.ಬಿ.ರಾಮಚಂದ್ರಪ್ಪನವರು 3 ದಶಕಗಳಿಗೂ ಹೆಚ್ಚಿನ ಕಾಲ ಪದವಿ ಕಾಲೇಜು ಹಾಗೂ ಕನ್ನಡ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸಿದ್ದಾರೆ.
“ಸ್ವಾತಂತ್ರ್ಯೋತ್ತರ ಕನ್ನಡ ಸಾಹಿತ್ಯದಲ್ಲಿ ಅಂಬೇಡ್ಕರ್ ಚಿಂತನೆಗಳು” ವಿಷಯದಲ್ಲಿ ಸಂಶೋಧನಾ ಮಹಾ ಪ್ರಬಂಧ ಮಂಡನೆ ಮಾಡಿ ಪಿಎಚ್ಡಿ ಪದವಿ ಹೊಂದಿದ್ದಾರೆ. ಈವರೆಗೆ ಅವರ 19 ಕೃತಿಗಳು ಪ್ರಕಟಗೊಂಡಿವೆ. ಪ್ರಸ್ತುತ ಕರ್ನಾಟಕ ಸರಕಾರದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾಗಿದ್ದಾರೆ.
ಕುವೆಂಪು ಕನ್ನಡ ಭವನದಲ್ಲಿ ಕಸಾಪ ಜಿಲ್ಲಾಧ್ಯಕ್ಷ ಬಿ.ವಾಮದೇವಪ್ಪ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಸಮ್ಮೇಳನದ ಕುರಿತಾಗಿ ಕೂಲಂಕಷವಾಗಿ ಚರ್ಚೆ ನಡೆಸಿ ಹಲವು ತೀರ್ಮಾನಗಳನ್ನು ಕೈಗೊಳ್ಳಲಾಯಿತು.
ಸಭೆಯಲ್ಲಿ ಭಾಗವಹಿಸಿದ ಬಹುತೇಕ ಕಾರ್ಯಕಾರಿ ಸಮಿತಿ ಸದಸ್ಯರು ಪ್ರೊ.ಎ.ಬಿ.ರಾಮಚಂದ್ರಪ್ಪನವರನ್ನು ಸರ್ವಾಧ್ಯಕ್ಷರಾಗಿ ಆಯ್ಕೆ ಮಾಡಲು ಒಲವು ತೋರಿದ್ದರಿಂದ ಸರ್ವಾಧ್ಯಕ್ಷತೆಯ ಆಯ್ಕೆ ಸುಗಮವಾಗಿ ನಡೆಯಿತು ಎಂದು ಕಸಾಪ ಜಿಲ್ಲಾಧ್ಯಕ್ಷ ಬಿ.ವಾಮದೇವಪ್ಪ ತಿಳಿಸಿದರು.
ಜಗಳೂರಿನ ಶಾಸಕ ಚಿಮ್ಮನಕಟ್ಟಿ ಬಿ.ದೇವೇಂದ್ರಪ್ಪ ಅವರು ಸಮ್ಮೇಳನಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ಹೇಳಿದ್ದಾರೆ. ಜನವರಿ 11 ಮತ್ತು 12 ರಂದು ಅರ್ಥಪೂರ್ಣವಾಗಿ ಸಮ್ಮೇಳನ ನಡೆಸುವುದಾಗಿ ಬಿ.ವಾಮದೇವಪ್ಪ ತಿಳಿಸಿದರು.
ಇದೇ ಸಂದರ್ಭದಲ್ಲಿ ದಾವಣಗೆರೆ ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಎರಡನೇ ಅವಧಿಗೆ ಚುನಾಯಿತರಾದ ಹಾಗೂ ಜಿಲ್ಲಾ ಕಸಾಪ ಪದ ನಿಮಿತ್ತ ಸದಸ್ಯ ವೀರೇಶ್ ಎಸ್ ಒಡೇನಪುರ ಅವರನ್ನು ಜಿಲ್ಲಾ ಕಸಾಪ ವತಿಯಿಂದ ಅಭಿನಂದಿಸಿ ಸನ್ಮಾನಿಸಲಾಯಿತು.
ಕಾರ್ಯಕಾರಿ ಸಭೆಯಲ್ಲಿ ಜಿಲ್ಲಾ ಗೌರವ ಕಾರ್ಯದರ್ಶಿ ಬಿ.ದಿಳ್ಯಪ್ಪ, ಗೌರವ ಕಾರ್ಯದರ್ಶಿ ರೇವಣಸಿದ್ದಪ್ಪ ಅಂಗಡಿ, ಗೌರವ ಕೋಶಾಧ್ಯಕ್ಷ ಕೆ.ರಾಘವೇಂದ್ರ ನಾಯರಿ, ಸಂಘಟನಾ ಕಾರ್ಯದರ್ಶಿಗಳಾದ ಸಿ.ಜಿ.ಜಗದೀಶ್ ಕೂಲಂಬಿ, ಜಿಗಳಿ ಪ್ರಕಾಶ್, ದಾವಣಗೆರೆ ತಾಲೂಕು ಅಧ್ಯಕ್ಷೆ ಸುಮತಿ ಜಯಪ್ಪ, ಜಗಳೂರು ತಾಲೂಕು ಅಧ್ಯಕ್ಷೆ ಕೆ.ಸುಜಾತಮ್ಮ, ಹರಿಹರ ತಾಲೂಕು ಅಧ್ಯಕ್ಷ ಡಿ.ಎಂ.ಮಂಜುನಾಥಯ್ಯ, ಚನ್ನಗಿರಿ ತಾಲೂಕು ಅಧ್ಯಕ್ಷ ಎಲ್.ಜಿ.ಮಧುಕುಮಾರ್, ಹೊನ್ನಾಳಿ ತಾಲೂಕು ಅಧ್ಯಕ್ಷ ಜಿ.ಮುರಿಗೆಪ್ಪಗೌಡ, ನ್ಯಾಮತಿ ತಾಲೂಕು ಅಧ್ಯಕ್ಷ , ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷ ವೀರೇಶ್ ಎಸ್ ಒಡೇನಪುರ, ಕಾರ್ಯಕಾರಿ ಸಮಿತಿ ಸದಸ್ಯರುಗಳಾದ ಸೋಮೇಶ್ವರ ಕೆ.ಎಂ.ಸುರೇಶ್, ಪ್ರಸಾದ್ ಬಂಗೇರ, ಎಸ್.ಎಂ.ಮಲ್ಲಮ್ಮ, ಬಿ.ಎಂ.ಭೈರವೇಶ್ವರ, ಸಿ.ಕೆ.ರುದ್ರಾಕ್ಷಿ ಬಾಯಿ, ಹೆಚ್.ಕೆ.ಸತ್ಯಭಾಮ ಮಂಜುನಾಥ್, ಎ.ರಿಯಾಜ್ ಅಹಮದ್, ಎಂ.ಎ.ಸುದರ್ಶನ್, ಕೆ.ಪಿ.ಮರಿಯಾಚಾರ್ ಮತ್ತಿತರರು ಸಭೆಯಲ್ಲಿ ಇತರರು ಭಾಗವಹಿಸಿದರು.