ಬೆಂಗಳೂರು.
ಕಿರುತೆರೆ ನಟನೋರ್ವ ನಟಿಗೆ ಲೈಂಗಿಕ ಕಿರುಕುಳ ನೀಡಿ ಹಲ್ಲೆಗೆ ಯತ್ನಿಸಿದ ಆರೋಪದಡಿ ಕಿರುತೆರೆ ನಟನನ್ನು ರಾಜರಾಜೇಶ್ವರಿ ನಗರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.
ಕಿರುಕುಳಕ್ಕೆ ಒಳಗಾದ ಯುವತಿ ಕಿರುತೆರೆ ನಟಿಯಾಗಿದ್ದಾರೆ. ಅವರು ನೀಡಿದ ದೂರಿನ ಮೇರೆಗೆ ನಟ ಚರಿತ್ ಬಾಳಪ್ಪ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಗರದ ನಾಯಂಡಹಳ್ಳಿಯಲ್ಲಿ ವಾಸವಾಗಿದ್ದ ಆರೋಪಿ ಮಂಗಳೂರಿನವನಾಗಿದ್ದು, ಹಲವು ವರ್ಷಗಳಿಂದ ಬೆಂಗಳೂರಿನಲ್ಲಿ ನೆಲೆಯೂರಿದ್ದರು. ಕನ್ನಡದ ಮುದ್ದುಲಕ್ಷಿ ಸೇರಿ ತೆಲುಗಿನ ಅನೇಕ ಧಾರವಾಹಿಗಳಲ್ಲಿ ನಟನಾಗಿ ಗುರುತಿಸಿಕೊಂಡಿದ್ದರು.
ಕಳೆದ ವರ್ಷ ದೂರುದಾರ ಯುವತಿಯನ್ನು ಪರಿಚಯಿಸಿಕೊಂಡಿದ್ದ ಚರಿತ್ ಬಾಳಪ್ಪ, ಆಕೆಯೊಂದಿಗೆ ಸಲುಗೆಯಿಂದ ಓಡಾಡಿಕೊಂಡಿದ್ದ. ಆತ್ಮೀಯತೆ ಹೆಚ್ಚಾಗುತ್ತಿದ್ದಂತೆ ಯುವತಿಯನ್ನು ಪ್ರೀತಿಸುವಂತೆ ಹಿಂದೆ ಬಿದ್ದಿದ್ದ. ಈತನ ಪ್ರೀತಿಗೆ ಯುವತಿ ನಿರಾಕರಿಸಿದ್ದಳು. ಪ್ರೀತಿ ನೆಪದಲ್ಲಿ ದೈಹಿಕ ಸಂಪರ್ಕ ಇಟ್ಟುಕೊಳ್ಳಲು ಒತ್ತಾಯಿಸಿದ್ದ. ಹಣ ಕೊಡುವಂತೆ ಪೀಡಿಸುತ್ತಿದ್ದ. ಇದಕ್ಕೆ ಒಪ್ಪದಿದ್ದಾಗ ಜೀವ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ಯುವತಿ ಪೊಲೀಸರಿಗೆ ತಿಳಿಸಿದ್ದಾಳೆ.
ದೈಹಿಕ ಸಂಪರ್ಕ ಇಟ್ಟುಕೊಳ್ಳಲು ನಿರಾಕರಿಸಿದರೆ ಖಾಸಗಿ ಫೋಟೊ, ವಿಡಿಯೊಗಳನ್ನು ಸಾಮಾಜಿಕ ಜಾಲತಾಣದಲ್ಲಿರುವ ಸ್ನೇಹಿತರ ಗ್ರೂಪ್ಗಳಿಗೆ ಹರಿಬಿಡುವುದಾಗಿ ಬೆದರಿಕೆಯೊಡ್ಡಿದ್ದನು. ತನಗೆ ರಾಜಕಾರಣಿಗಳ ಹಾಗೂ ಪೊಲೀಸರ ಬೆಂಬಲವಿದೆ, ರೌಡಿಗಳ ಪರಿಚಯವಿದೆ. ಸುಳ್ಳು ಪ್ರಕರಣ ದಾಖಲಿಸಿ ಸಾಯುವವರೆಗೂ ಜೈಲಿನಲ್ಲಿ ಕೊಳೆಯುವಂತೆ ಮಾಡುತ್ತೇನೆ ಎಂದು ಹಲವು ಬಾರಿ ಹಲ್ಲೆ ಮಾಡಿರುವುದಾಗಿ ಯುವತಿ ದೂರಿನಲ್ಲಿ ಆರೋಪಿಸಿದ್ದಾಳೆ.
ವಿವಾಹಿತನಾಗಿರುವ ಚರಿತ್ ಕೆಲ ವರ್ಷಗಳ ಹಿಂದೆ ಪತ್ನಿಯಿಂದ ವಿಚ್ಚೇದನ ಪಡೆದುಕೊಂಡಿದ್ದಾನೆ. ನ್ಯಾಯಾಲಯದ ಆದೇಶದಂತೆ ಪರಿಹಾರ ನೀಡುವಂತೆ ಪತ್ನಿ ಕಳುಹಿಸಿದ್ದ ನೋಟಿಸ್ಗೆ ಬೆದರಿಕೆ ಹಾಕಿದ್ದ. ಈ ಸಂಬAಧ ಸರ್ಜಾಪುರ ಠಾಣೆಯಲ್ಲಿ ಎನ್ಸಿಆರ್ ದಾಖಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.