
ಶಿವಮೊಗ್ಗ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾ ಅಧ್ಯಕ್ಷ ಸ್ಥಾನದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದು ತಮ್ಮನ್ನು ಗೆಲ್ಲಿಸಬೇಕು ಎಂದು ರುದ್ರಮುನಿ ಎನ್. ಸಜ್ಜನ್ ಮತದಾರರಲ್ಲಿ ಮನವಿ ಮಾಡಿದ್ದಾರೆ.
ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನಾನು ಅಧ್ಯಕ್ಷನಾಗಿದ್ದ ಅವಧಿಯಲ್ಲಿ ಹಲವು ಸಾಧನೆಗಳನ್ನು ಮಾಡಿದ್ದೇನೆ. ಮತ್ತೊಮ್ಮೆ ಸೇವಾ ಆಕಾಂಕ್ಷಿಯಾಗಿ ಸ್ಪರ್ಧಿಸಿದ್ದೇನೆ.
ನಮ್ಮ ತಂಡ ಉತ್ತಮವಾಗಿ ಕೆಲಸ ಮಾಡಿದೆ. ಪ್ರತಿಭಾ ಪುರಸ್ಕಾರ, ಕೆಳದಿ ಶಿವಪ್ಪನಾಯಕ ಪ್ರಶಸ್ತಿ ರೂಪಿಸಿ ನಾಡಿನ ಗಣ್ಯರಿಗೆ ನೀಡಿದ್ದೇವೆ. ಎಸ್ಎಸ್ಎಲ್ಸಿ, ಪಿಯುಸಿಯಲ್ಲಿ ಉತ್ತಮ ಅಂಕ ಪಡೆದ ಮಕ್ಕಳಿಗೆ ಪ್ರೋತ್ಸಾಹ ನೀಡಿದ್ದೇವೆ ಎಂದರು.


ಮಹಾಸಭಾಕ್ಕೆ ಸ್ವಂತ ಕಟ್ಟಡದ ಅಗತ್ಯವಿದ್ದು ಸೂಡಾದ ಸಹಕಾರದಿಂದ ಕುವೆಂಪು ನಗರದಲ್ಲಿ ಸುಮಾರು 14 ಲಕ್ಷ ರೂ. ಮೌಲ್ಯದ ನಿವೇಶನ ಪಡೆದು ನಂತರ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಎರಡು ಕೋಟಿ ರೂ. ಅನುದಾನ ಮತ್ತು ದಾನಿಗಳ ಸಹಕಾರದಿಂದ ಮೂರು ಕೋಟಿ ರೂ. ವೆಚ್ಚದಲ್ಲಿ ಭವ್ಯ ಕಟ್ಟಡ ನಿರ್ಮಿಸಲಾಗಿದೆ. ಜೊತೆಗೆ ಈಗಿರುವ ಕಟ್ಟಡಕ್ಕೆ ಹೊಂದಿಕೊಂಡಂತೆ ಮತ್ತೊಂದು ನಿವೇಶನ ಮಂಜೂರು ಮಾಡಿಸಿಕೊಂಡಿದ್ದೇವೆ ಎಂದರು.ಆದ್ದರಿಂದ ಈ ಬಾರಿಯೂ ನನ್ನನ್ನು ಗೆಲ್ಲಿಸಿ ತಮ್ಮಗಳ ಸೇವೆಗೆ ಅವಕಾಶ ಕಲ್ಪಿಸಬೇಕು. ನಾನು ಗೆದ್ದರೆ ಸಮಾಜದ ಪ್ರತಿಭಾವಂತ ಮಕ್ಕಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡುತ್ತೇವೆ. ವಧು, ವರರ ಅನ್ವೇಷಣಾ ಕೇಂದ್ರ ತೆರೆಯಲಾಗುವುದು, ಹೊಸ ಕಟ್ಟಡಗಳನ್ನು ನಿರ್ಮಿಸಲಾಗುವುದು ಎಂದರು.,
ಮಲ್ಲಿಕಾರ್ಜುನಸ್ವಾಮಿ ಜಿ.ಎಂ. ಮಾತನಾಡಿ, ನಾನು ತಾಲೂಕು ಘಟಕದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದು, ನನ್ನನ್ನು ಗೆಲ್ಲಿಸಬೇಕೆಂದು ಮನವಿ ಮಾಡಿದರು.ಪತ್ರಿಕಾಗೋಷ್ಠಿಯಲ್ಲಿ ಆನಂದಮೂರ್ತಿ, ಕೆ.ಆರ್. ಸೋಮನಾಥ್ ಇದ್ದರು.
….