ಬೆಂಗಳೂರು: ಸಿನಿಮಾ ಚಿತ್ರೀಕರಣದ ವೇಳೆ ಮೂವತ್ತು ಅಡಿ ಕಟ್ಟಡದಿಂದ ಕೆಳಗೆ ಬಿದ್ದು, ಲೈಟ್‌ಮನ್‌ವೊಬ್ಬ ಮೃತಪಟ್ಟ ಘಟನೆ ಬೆಂಗಳೂರು ಗ್ರಾಮಾಂತರದ ನೆಲಮಂಗಲ ಬಳಿಯ ಅಡಕಮಾರನಹಳ್ಳಿಯಲ್ಲಿ ನಡೆದಿದ್ದು,
ಚಿತ್ರ ನಿರ್ದೇಶಕ ಯೋಗರಾಜ್ ಭಟ್ ಮೇಲೆ ಎಫ್‌ಐಆರ್ ದಾಖಲಾಗಿದೆ.

ಯೋಗರಾಜ್ ಭಟ್ ನಿರ್ದೇಶನದ ಮನದ ಕಡಲು ಸಿನಿಮಾ ಚಿತ್ರಿಕರಣದ ವೇಳೆ ಈ ಅವಘಡ ಸಂಭವಿಸಿತ್ತು. ಲೈಟ್ ಮ್ಯಾನ್ ಮೋಹನ್ ಕುಮಾರ್ ಮೃತ ದುರ್ದೈವಿ. ಕಳೆದ ಸೆ. 3ರ ಸಂಜೆ ಶೂಟಿಂಗ್ ಸೆಟ್‌ನಲ್ಲಿ ಲೈಟ್ ಬಿಚ್ಚುವಾಗ ಆಯ ತಪ್ಪಿ ಮೋಹನ್ ಕುಮಾರ್ ಕೆಳಗೆ ಬಿದ್ದಿದ್ದರು. ಕೆಳಗೆ ಬಿದ್ದ ರಭಸಕ್ಕೆ ಮೋಹನ್ ಕುಮಾರ್ ತಲೆಗೆ ಗಂಭೀರ ಪೆಟ್ಟಾಗಿ ರಕ್ತಸ್ರಾವವಾಗಿತ್ತು. ಅಲ್ಲಿದ್ದವರು ಕೂಡಲೇ ಮೋಹನ್ ಕುಮಾರ್‌ನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ ಗೊರಗುಂಟೆಪಾಳ್ಯ ಖಾಸಗಿ ಆಸ್ಪತ್ರೆಯಲ್ಲಿ ಮೋಹನ್ ಕುಮಾರ್ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಘಟನೆ ಸಂಬಂಧ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ. ನಿರ್ದೇಶಕ ಯೋಗರಾಜ್ ಭಟ್ ಸೇರಿದಂತೆ ಮ್ಯಾನೇಜರ್ ಸುರೇಶ್, ಅಸಿಸ್ಟೆಂಟ್ ಮ್ಯಾನೇಜರ್ ಮನೋಹರ್, ಅಡಕಮಾರನಹಳ್ಳಿಯ ಕೃಷ್ಣಪ್ಪ ವಿರುದ್ಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಮೃತನ ಸಹೋದರ ಶಿವರಾಜ್ ಪ್ರಕರಣ ದಾಖಲಿಸಿದ್ದಾರೆ.

Share.
Leave A Reply

Exit mobile version