ದಾವಣಗೆರೆ:  ರಾಜ್ಯದಲ್ಲಿ ವೈಜ್ಞಾನಿಕವಾಗಿ ಮತ್ತು ವಾಸ್ತವಾಂಶ ಆಧಾರಿತವಾಗಿ ಹೊಸದಾಗಿ ಜಾತಿ ಜನಗಣತಿ ಮಾಡಬೇಕೆಂದು ಅಖಿಲ ಭಾರತ ವೀರಶೈವ ಮಹಾಸಭಾ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದೆ.

ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ಡಾ.ಶಾಮನೂರು ಶಿವಶಂಕರಪ್ಪ ನೇತೃತ್ವದಲ್ಲಿ  ಬೆಳಗಾವಿಯಲ್ಲಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ ಈ ಆಗ್ರಹ ಮಾಡಲಾಯಿತು.

ವೀರಶೈವ ಲಿಂಗಾಯತ ಮಹಾಸಭಾ ಬಸವಾದಿ ಪ್ರಮಥರ ತತ್ವಗಳನ್ನು ಪರಿಪಾಲಿಸುತ್ತಿದ್ದು, ಸರ್ವರಿಗೂ ಲೇಸನ್ನು ಬಯಸುವ ಮತ್ತು ಸಮ ಸಮಾಜದ ನಿರ್ಮಾಣ ಮಾಡಬೇಕೆಂಬ ಶರಣರ ತತ್ವದ ಆಧಾರದ ಮೇಲೆಯೇ ನಡೆಯುತ್ತಿರುವ ಸಂಸ್ಥೆಯಾಗಿದೆ. 

ನಾವು ಜಾತಿ ಜನಗಣತಿಯ ವಿರೋಧಿಗಳಲ್ಲ ಎಂಬುದನ್ನು ಈ ಸಂದರ್ಭದಲ್ಲಿ ತಮಗೆ ಸ್ಪಷ್ಟಪಡಿಸಲು ಇಚ್ಛಿಸುತ್ತೇವೆ. ಆದರೆ, ಕಳೆದ 8 ವರ್ಷಗಳ ಹಿಂದೆ ನಡೆಸಲಾದ ಈ ಸಾಮಾಜಿಕ – ಆರ್ಥಿಕ ಸಮೀಕ್ಷೆ ಹಲವು ವೈರುಧ್ಯ ಮತ್ತು ಲೋಪಗಳಿಂದ ಕೂಡಿದ್ದು, ಇದನ್ನು ಸರಿಪಡಿಸುವ ಅಗತ್ಯವಿದೆ ಎಂಬುದು ನಮ್ಮ ಅಭಿಪ್ರಾಯವಾಗಿದೆ. ಹೀಗಾಗಿ ಹೊಸದಾಗಿ ವೈಜ್ಞಾನಿಕವಾಗಿ ಸಮೀಕ್ಷೆ ನಡೆಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಮಹಾಸಭಾದ ಅನೇಕ ತಾಲೂಕು ಮತ್ತು ಜಿಲ್ಲಾ ಮಟ್ಟದ ಸಭೆಗಳಲ್ಲಿ ಈ ಸಮೀಕ್ಷೆಯ ಬಗ್ಗೆ, ಪ್ರಸ್ತಾಪಿಸಿದಾಗ, ಅನೇಕರು, ತಮ್ಮ ಮನೆಗೆ ಸರ್ಕಾರಿ ಅಧಿಕಾರಿಗಳು ಬಂದಿಲ್ಲ. ತಮ್ಮ ಕುಟುಂಬದ ಯಾವುದೇ ಮಾಹಿತಿ ಪಡೆದಿಲ್ಲ. ಕಚೇರಿಯಲ್ಲಿಯೇ ಕುಳಿತು ಈ ಸಮೀಕ್ಷಾ ವರದಿ ಸಿದ್ಧಪಡಿಸಿ ಕಳಿಸಿದ್ದಾರೆ ಎಂದು ಆರೋಪ ಮಾಡುತ್ತಿದ್ದಾರೆ.

ಮಿಗಿಲಾಗಿ ಆರ್ಥಿಕ ಸಾಮಾಜಿಕ ಸಮೀಕ್ಷೆ ನಡೆದಾಗ ವೀರಶೈವ ಲಿಂಗಾಯತ ಸಮುದಾಯದ ಬಹುಪಾಲು ಜನರು ತಮಗೆ ಲಭಿಸುವ ಮೀಸಲಾತಿಯಲ್ಲಿ ಅನ್ಯಾಯವಾ ಗುತ್ತದೆ ಎಂಬ ಭಯದಿಂದ ವೀರಶೈವ ಅಥವಾ ಲಿಂಗಾಯತ ಎಂದು ಬರೆಸದೆ ತಮ್ಮ ಒಳಪಂಗಡಗಳನ್ನು ನಮೂದಿಸಿದ್ದಾರೆ.

ಅಂತೆಯೇ ಕರ್ನಾಟಕದಲ್ಲಿರುವ ಹಲವರು ತಮ್ಮ ಜಾತಿಯ ಕುರಿತಂತೆ ಸ್ವಯಂ ಘೋಷಣೆ ಮಾಡಿಕೊಂಡಿದ್ದಾರೆ. ಆದರೆ, ನಿಜವಾಗಿಯೂ ಅವರು ಆ ಜಾತಿ, ಸಮುದಾಯಕ್ಕೆ ಸೇರಿದವರೇ ಎಂಬ ಸತ್ಯಾಸತ್ಯತೆ ಅರಿಯಲು ಯಾವುದೇ ಪರಿಶೀಲನೆ ಅಥವಾ ಪರಾಮರ್ಶೆ ಆಗಿಲ್ಲ, ಹೀಗಾಗಿ ಈ ಸಮೀಕ್ಷೆಯಲ್ಲಿ ಸಂಗ್ರಹಿಸಿರುವ ಮಾಹಿತಿಯಲ್ಲೇ ದೋಷವಿದೆ ಎಂಬುದು ನಮ್ಮ ಸಭಾದ ಒಟ್ಟು ಅಭಿಪ್ರಾಯವಾಗಿದೆ ಎಂದು ಹೇಳಲಾಗಿದೆ.

ಪ್ರತಿ 10 ವರ್ಷಗಳಿಗೆ ಒಮ್ಮೆ ಜನಗಣತಿ ನಡೆಸುವುದು ಹಿಂದಿನಿಂದಲೂ ನಡೆದುಕೊಂಡು ಬಂದಿರುವ ಸಂಪುದಾಯವಾಗಿದೆ. ಈಗಾಗಲೇ ರಾಜ್ಯದಲ್ಲಿ ನಡೆದಿರುವ ಸಾಮಾಜಿಕ ಆರ್ಥಿಕ ಸ್ಥಿತಿಗತಿಯ ಸಮೀಕ್ಷೆ 8 ವರ್ಷದಷ್ಟು

ಹಳೆಯದಾಗಿದ್ದು, ಇದನ್ನು ಯಥಾವತ್ ಅಂಗೀಕರಿಸುವುದು ಸೂಕ್ತವಾಗಿರುವುದಿಲ್ಲ. ಈ ನಿಟ್ಟಿನಲ್ಲಿ ವೀರಶೈವ ಲಿಂಗಾಯತ ಸಮುದಾಯದ ಎಲ್ಲಒಳಪಂಗಡಗಳನ್ನೂ ಸೇರಿಸಿ ಸಂಪೂರ್ಣ ವೈಜ್ಞಾನಿಕವಾಗಿ ಹೊಸದಾಗಿ ಜಾತಿ ಜನಗಣತಿ ನಡೆಸಿ ವಾಸ್ತವಾಂಶ ಆಧಾರಿತವಾಗಿ ಅಂಕಿ-ಅಂಶಗಳನ್ನು ದಾಖಲಿಸಿದರೆ ಅರ್ಹರಿಗೆ ಸೌಲಭ್ಯ ಕಲ್ಪಿಸಲು ಅನುಕೂಲವಾಗುತ್ತದೆ ಎಂದು ಮನವಿ ಮಾಡಲಾಗಿದೆ.

ಸಮ ಸಮಾಜದ ಪರಿಕಲ್ಪನೆಯನ್ನು ಜಗತ್ತಿಗೆ ನೀಡಿದ ವೀರಶೈವ ಲಿಂಗಾಯತ ಸಮುದಾಯ ನಾವು ಯಾರ ಹಕ್ಕನ್ನೂ ಕಸಿದುಕೊಳ್ಳುವವರಲ್ಲ. ಎಲ್ಲರಿಗೂ ಸಾಮಾಜಿಕ ನ್ಯಾಯ ದೊರಕಬೇಕು ಎಂಬುದು ನಮ್ಮ ತತ್ವವಾಗಿದೆ. ಬದ್ಧತೆಯಾಗಿದೆ. ಆದರೆ, ಈಗಾಗಲೇ ರಾಜ್ಯದಲ್ಲಿ ನಡೆದಿರುವ ಸಾಮಾಜಿಕ ಆರ್ಥಿಕ ಸಮೀಕ್ಷೆ (ಜಾತಿಗಣತಿ) ಅಸಮರ್ಪಕವಾಗಿರುವ ಹಿನ್ನೆಲೆಯಲ್ಲಿ ಇದನ್ನು ಈ ಹಂತದಲ್ಲಿ ಅಂಗೀಕರಿಸಿದರೆ ನಮ್ಮ ಸಮುದಾಯಕ್ಕೆ ಅಷ್ಟೇ ಅಲ್ಲದೆ ಈ ಸಮಾಜದ ವಂಚಿತರು, ಶೋಷಿತರು, ಮಧ್ಯಮವರ್ಗದ ಆರ್ಥಿಕ ದುರ್ಬಲರಿಗೆ ಘೋರ ಅನ್ಯಾಯ ಮಾಡಿದಂತಾಗುತ್ತದೆ.

ಈ ನಿಟ್ಟಿನಲ್ಲಿ ಬಸವತತ್ವ ಪರಿಪಾಲಕರಾದ ತಾವು ವೈಚಾರಿಕ ನೆಲೆಗಟ್ಟಿನಲ್ಲಿ ಪರಾಮರ್ಶಿಸಿ, ಹೊಸದಾಗಿ ಜಾತಿ ಜನಗಣತಿ ಮಾಡಿಸಲು ಮತ್ತು ಈಗಾಗಲೇ ನಡೆಸಲಾಗಿರುವ ಸಮೀಕ್ಷಾ ವರದಿಯನ್ನು ಅಂಗೀಕರಿಸದಿರಲು ನಿನ್ನೆ ಸಭೆ ಸೇರಿದ್ದ ನಮ್ಮ ಸಮಾಜದ ಎಲ್ಲ ಜನ ಪ್ರತಿನಿಧಿಗಳು (ಸಚಿವರು ಮತ್ತು ಶಾಸಕರು) ಮನವಿ ಮಾಡಲು ತೀರ್ಮಾನಿಸಿದ್ದಾರೆ ಎಂದು‌ ಮನವಿಯಲ್ಲಿ ಹೇಳಲಾಗಿದೆ.

ಈ ಸಂದರ್ಭದಲ್ಲಿ ಮಹಾಸಭಾ ಮಹಾಪ್ರಧಾನ ರಾಷ್ಟ್ರೀಯ ಕಾರ್ಯದರ್ಶಿ ಈಶ್ವರ್ ಖಂಡ್ರೆ,‌ ಉಪಾಧ್ಯಕ್ಷರಾದ ಅಣಬೇರು ರಾಜಣ್ಣ, ಅಥಣಿ ವೀರಣ್ಣ,ಸಚಿವ ಎಂ.ಬಿ.ಪಾಟೀಲ್ , ಲಿಂಗಾಯತ ಸಮಾಜದ ಶಾಸಕರು,‌ಸಚಿವರು ಸೇರಿದಂತೆ  ಮಹಾಸಭಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

Share.
Leave A Reply

Exit mobile version