ಹರಪನಹಳ್ಳಿ;ಪಂಚಗಣಾದೀಶರರ ಐತಿಹಾಸಿಕ ಹಿನ್ನಲೆಯುಳ್ಳ ತಾಲೂಕಿನ ಕೂಲಹಳ್ಳಿ ಶ್ರೀ ಗೋಣಿಬಸವೇಶ್ವರ ರಥೋತ್ಸವವು ಅಪಾರ ಭಕ್ತರ ನಡುವೆ ಸಕಲ ಬಿರುದಾವಳಿಗಳಿಂದ ವೈಭವದಿಂದ ಜರುಗಿತು.

ಗ್ರಾಮದ ಹೊರವಲಯದಲ್ಲಿ ನಿರ್ಮಿಸಿದ್ದ ಆಕರ್ಷಕ ರಥಕ್ಕೆ ಕೆಂಪು, ಬಿಳಿ ಸೇರಿದಂತೆ ವಿವಿಧ ಬಣ್ಣಗಳ ಬಾವುಟ ಹಾಗೂ ಹಲವು ದೇವಾನುದೇವತೆಗಳ ಭಾವಚಿತ್ರ ಅಳವಡಿಕೆಯ ಜತೆಗೆ, ಬಾಳೆದಿಂಡು, ಮಾವಿನ ತೋರಣ ಹಾಗೂ ಪುಷ್ಪ ಮಾಲೆಯೊಂದಿಗೆ ಅಲಂಕರಿಸಲಾಗಿತ್ತು.

ಮಠದ ಪೀಠಾಧಿಪತಿ ಪಟ್ಟದ ಚಿನ್ಮಯ ಸ್ವಾಮೀಜಿ ನೇತೃತ್ವದಲ್ಲಿ ಬಿರುದಾವಳಿ ಮೂಲಕ ಸಕಲ ವಾದ್ಯತಂಡಗಳ ಭಾಜ -ಭಜಂತ್ರಿಯೊಂದಿಗೆ ಕೊಟ್ಟೂರೇಶ್ವರ ದೇವಸ್ಥಾನಕ್ಕೆ ಆಗಮಿಸಿ. ವಿಶೇಷ ಪೂಜೆ ಸಲ್ಲಿಸಿ ನಂತರ ದೇಗುಲದಲ್ಲಿನ ಉತ್ಸವ ಮೂರ್ತಿಯನ್ನು ಪಲ್ಲಕ್ಕಿಯಲ್ಲಿ ಕುಳ್ಳಿರಿಸಿಕೊಂಡು ಮೆರವಣಿಗೆ ಹೊರಟಿತು. ರಥವನ್ನು ಐದು ಸುತ್ತು ಪ್ರದಕ್ಷಿಣೆ ಹಾಕಿದ ನಂತರ ಗೋಣಿಬಸವೇಶ್ವರರ ಪಟ(ಧ್ವಜ)ವನ್ನು ಬಹಿರಂಗ ಹರಾಜು ಮಾಡಲಾಯಿತು.

ಕೊಟ್ಟೂರೇಶ್ವರ ಉತ್ಸವ ಮೂರ್ತಿಯನ್ನು ರಥಮಂಟಪದಲ್ಲಿ ಪ್ರತಿಷ್ಠಾಪಿಸುವ ಮೂಲಕ ಅರ್ಚಕರು ಮಹಾ ಮಂಗಳಾರತಿ ನೆರವೇರಿಸುತ್ತಿದ್ದಂತಿಯೇ ಭರ್ಜರಿ ಜಯಘೋಷಗಳ ನಡುವೆ ರಥೋತ್ಸವಕ್ಕೆ ಉತ್ತರಾಭಿಮುಖವಾಗಿ ಚಾಲನೆ ನೀಡಲಾಯಿತು.

ಹರಕೆ ಹೊತ್ತಿದ್ದ ಭಕ್ತರು, ರಥಕ್ಕೆ ತೆಂಗಿನಕಾಯಿ, ಬಾಳೆಹಣ್ಣು ತೂರಿ ಹರಕೆ ಸಮರ್ಪಿಸಿದರು. ಚಿತ್ರದುರ್ಗ ದಾವಣಗೆರೆ, ಬಳ್ಳಾರಿ, ಗದಗ, ಹಾಗೂ ಹಾವೇರಿ ಜಿಲ್ಲೆಗಳು ಸೇರಿದಂತೆ ನಾಡಿನಾದ್ಯಂತ ಭಕ್ತ ಸಾಗರವೇ ರಥೋತ್ಸವದ ಸಂಭ್ರಮಕ್ಕೆ ಸಾಕ್ಷಿಯಾದರು.

ಪಾದಯಾತ್ರೆಯಲ್ಲಿ ಬಂದ ಭಕ್ತರು

ಶ್ರೀ ಗೋಣಿಬಸವೇಶ್ವರರ ರಥೋತ್ಸವದ ದಿನಕ್ಕೆ ಸುತ್ತಮುತ್ತಲ ಗ್ರಾಮದವರು ಎತ್ತಿನ ಬಂಡಿ, ಟ್ರಾಕ್ಟರ್, ಕಾರುಗಳಲ್ಲಿ, ದ್ವಿಚಕ್ರ ವಾಹನಗಳಲ್ಲಿ ಆಗಮಿಸಿದರೆ, ವಿವಿಧ ತಾಲೂಕಿನಿಂದ ವಿವಿಧ ಭಾಗಗಳಿಂದ ಭಕ್ತರು ಪಾದಯಾತ್ರೆಯ ಮೂಲಕ ಆಗಮಿಸಿ ಸ್ವಾಮಿಯ ಕೃಪೆಗೆ ಪಾತ್ರರಾಗಿದ್ದಾರೆ.ವಿವಿಧ ಭಾಗಗಳಿಂದ ಪಾದಯಾತ್ರೆಯ ಮೂಲಕ ಆಗಮಿಸಿದ ಭಕ್ತರಿಗೆ ಬಾಗಳಿ, ಬಂಡ್ರಿ, ಶೃಂಗಾರತೋಟ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳು ಗ್ರಾಮಸ್ಥರು ಹಣ್ಣು, ಪ್ರಸಾದ, ಮಜ್ಜಿಗೆ, ತಂಪು ಪಾನಿಯಗಳನ್ನು ನೀಡಿ ಭಕ್ತಿ ಮೆರೆದರು

Share.
Leave A Reply

Exit mobile version