ಶಿವಮೊಗ್ಗ ; ಬೆಂಗಳೂರಿನಲ್ಲಿ ಕಳೆದ 10 ವರ್ಷಗಳಿಂದ ಕೆಎಸ್ಡಿಎಲ್ನ ಖರೀದಿ ವಿಭಾಗದಲ್ಲಿ ಅಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಶಿವಮೊಗ್ಗ ಜಿಲ್ಲೆ ಶಿರಾಳಕೊಪ್ಪ ಮೂಲದ ಡೆತ್ನೋಟ್ ಬರೆದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬೆAಗಳೂರಿನ ಮಹಾಲಕ್ಷ್ಮೀ ಲೇಔಟ್ ಮುನೇಶ್ವರ ಬ್ಲಾಕ್ ನಿವಾಸಿ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ ಅಮೃತ್ ಶಿರೂರ್ (40) ಮೃತಪಟ್ಟ ಅಧಿಕಾರಿ. ಇವರು ಡಿ.28ರಂದು ಸಂಜೆ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆಯ ಮಾಲೀಕ ಗಿರೀಶ್ ಅವರು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮನೆಯ ಮಾಲೀಕ ಗಿರೀಶ್ ಅವರು ನೀಡಿದ ಮಾಹಿತಿ ಮೇರೆಗೆ ಸ್ಥಳಕ್ಕೆ ತೆರಳಿದ ಪೊಲೀಸರು ಪರಿಶೀಲನೆ ನಡೆಸಿ, ಮೃತದೇಹವನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ.
ಘಟನಾ ಸ್ಥಳದಲ್ಲಿ ಅಮೃತ್ ಶಿರೂರ್ ಆತ್ಮಹತ್ಯೆಗೂ ಮುನ್ನ ಬರೆದಿರುವ ಡೆತ್ ನೋಟ್ ಪತ್ತೆಯಾಗಿದ್ದು, ಪೊಲೀಸರು ಜಪ್ತಿ ಮಾಡಿದ್ದಾರೆ. ಪೋಷಕರಿಗೆ ಒಳ್ಳೆಯ ಮಗನಾಗಲಿಲ್ಲ. ಪತ್ನಿಗೆ ಒಳ್ಳೆಯ ಗಂಡನಾಗಲಿಲ್ಲ. ನನ್ನ ಸಾವಿಗೆ ಯಾರೂ ಕಾರಣರಲ್ಲ. ನನ್ನ ಸಾವಿಗೆ ನಾನೇ ಕಾರಣ ಎಂದು ಬರೆದಿದ್ದಾರೆ ಎಂಬ ಮಾಹಿತಿ ಇದೆ. ಈ ಸಂಬಂಧ ಮಹಾಲಕ್ಷ್ಮೀ ಲೇಔಟ್ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೃತ ಅಮೃತ್ ಶಿರೂರ್ ಅವರು ಎರಡು ಮದುವೆಯಾಗಿದ್ದರು. ಮೊದಲಿಗೆ ಪ್ರೇಮ ವಿವಾಹವಾಗಿದ್ದು, ಕೆಲವೇ ತಿಂಗಳಲ್ಲಿ ಪತ್ನಿಯಿಂದ ವಿಚ್ಚೇದನ ಪಡೆದಿದ್ದರು. 2019ರಲ್ಲಿ ಎರಡನೇ ಮದುವೆಯಾಗಿದ್ದು, ದಂಪತಿ ನಡುವೆ ಮನಸ್ತಾಪವಾಗಿ ದೂರವಾಗಿದ್ದರು. ದಂಪತಿ ವಿಚ್ಚೇದನದ ಅರ್ಜಿ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದೆ. ಕೆಲವು ವರ್ಷಗಳಿಂದ ಅಮೃತ್ ಮುನೇಶ್ವರ ಬ್ಲಾಕ್ ನ ಬಾಡಿಗೆ ಮನೆಯಲ್ಲಿ ಒಂಟಿಯಾಗಿ ನೆಲೆಸಿದ್ದರು. ಇದೀಗ ಕೌಟುಂಬಿಕ ಕಾರಣಗಳಿಂದ ಮನನೊಂದಿದ್ದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.